ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಚಿಂತನ-ಮಂಥನ ಸಭೆ
ಬೆಂಗಳೂರು: ರಾಜ್ಯದಲ್ಲಿ ಬಾಲ್ ಬ್ಯಾಡ್ಮಿಂಟನ್ (ball badminton) ಕ್ರೀಡೆಯ ಸಮಗ್ರ ಅಭಿವೃದ್ಧಿ, ಪ್ರಸಾರ ಹಾಗೂ ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ನಗರದ ಶ್ರೀ ಕಂಠೀರವ ಕ್ರೀಡಾಂಗಣದ ಆವರಣದಲ್ಲಿ "ಬಾಲ್ ಬ್ಯಾಡ್ಮಿಂಟನ್ ಚಿಂತನ-ಮಂಥನ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎನ್. ನಾರಾಯಣಸ್ವಾಮಿ ವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಮಹಾದೇವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 70ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ಹಿರಿಯ ಆಟಗಾರರು, ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಪ್ರಸ್ತುತ ಆಟಗಾರರು, ತೀರ್ಪುಗಾರರು, ತರಬೇತುದಾರರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯ ಇಂದಿನ ಸ್ಥಿತಿ, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡೆಯ ವಿಸ್ತರಣೆ, ಶಾಲಾ ಮತ್ತು ಕಾಲೇಜು ಮಟ್ಟದಲ್ಲಿ ಪ್ರೋತ್ಸಾಹ, ಆಟಗಾರರಿಗೆ ಹೆಚ್ಚಿನ ಸ್ಪರ್ಧಾತ್ಮಕ ಅವಕಾಶಗಳ ಸೃಷ್ಟಿ, ತೀರ್ಪುಗಾರರ ತರಬೇತಿ, ಕ್ರೀಡಾ ಮೀಸಲಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ಮತ್ತು ವಿಚಾರ ವಿನಿಮಯ ನಡೆಯಿತು.
ಭಾಗವಹಿಸಿದವರು ತಮ್ಮ ಅನುಭವಗಳು ಹಾಗೂ ಸಲಹೆಗಳನ್ನು ಹಂಚಿಕೊಂಡು, ರಾಜ್ಯದಲ್ಲಿ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಚಿಂತನ-ಮಂಥನ ಸಭೆಯು ಕ್ರೀಡೆಯ ಭವಿಷ್ಯದ ಬೆಳವಣಿಗೆಗೆ ಮಾರ್ಗಸೂಚಿ ರೂಪಿಸುವಲ್ಲಿ ಮಹತ್ವದ ವೇದಿಕೆಯಾಗಿ ಪರಿಣಮಿಸಿತು.
ಕಾರ್ಯಕ್ರಮದ ಯಶಸ್ವಿ ನಿರ್ವಹಣೆಯಲ್ಲಿ ರಾಜ್ಯ ಸಂಸ್ಥೆಯ ಪದಾಧಿಕಾರಿಗಳಾದ ಸುಂದರರಾಜು, ಜಿ.ಬಿ. ನಾಗರಾಜ್, ಗೌತಮ್, ರಾಘವೇಂದ್ರ ಪ್ರಸಾದ್ ಹಾಗೂ ಸಿ. ಬಾಬುರೆಡ್ಡಿ ಪ್ರಮುಖ ಪಾತ್ರ ವಹಿಸಿದರು.